Friday, November 1, 2013

ಹೇಳಿ ಹೋಗು ಕಾರಣ

ಹೇಳಿ ಹೋಗು ಕಾರಣ ಹೋಗುವ ಮೊದಲು
ನನ್ನ ಬಾಳಿನಿಂದ ದೂರಾಗುವ ಮೊದಲು

ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ

ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ಸೆರೆ ಉಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ

ಬಿ.ಆರ್. ಲಕ್ಷ್ಮಣರಾವ್
ಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: